ಉಡುಪಿ ಜಿಲ್ಲೆಯನ್ನು ತಂಬಾಕು ಮುಕ್ತಗೊಳಿಸಲು ಕೋಟ್ಪಾ ಕಾಯ್ದೆ ಕಟ್ಟುನಿಟ್ಟಾಗಿ ಜ್ಯಾರಿ: ಎಸ್ಪಿ ಅಣ್ಣಾಮಲೈ
- Updated: February 26, 2015

ಉಡುಪಿ: ಉಡುಪಿ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ವಿವಿಧ ಇಲಾಖೆಗಳು ಕೋಟ್ಪಾ ಕಾಯಿದೆ ಅನುಷ್ಠಾನಕ್ಕೆ ಪರಿಣಾಮಕಾರಿಯಾಗಿ ಕ್ರಮ ಜರುಗಿಸಬೇಕು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಣ್ಣಾಮಲೈ ಅವರು ಸೂಚಿಸಿದ್ದಾರೆ.
ಪೊಲೀಸ್ ಇಲಾಖೆಯ ಸಭಾಂಗಣದಲ್ಲಿ ಇಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗಾಗಿ ಆಯೋಜಿಸಲಾದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 30 ದಿನಗಳೊಳಗೆ ಉಡುಪಿ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸುವ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದು ತಿಳಿಸಿದರು. ಮುಖ್ಯವಾಗಿ ವಿದ್ಯಾಂಗ ಇಲಾಖೆಯ ಉಪನಿರ್ದೇಶಕರು ಮತ್ತು ಇತರ ಅಧಿಕಾರಿಗಳ ಹೊಣೆಯ ಬಗ್ಗೆ ಪ್ರಸ್ತಾಪಿಸಿದ ಅವರು ಶಾಲಾ, ಕಾಲೇಜುಗಳ ಆವರಣದಲ್ಲಿ ಈ ಬಗ್ಗೆ ಮಾಹಿತಿ ಫಲಕಗಳನ್ನು ಲಗತ್ತಿಸಲು 7 ದಿನಗಳ ಕಾಲಾವಕಾಶ ನೀಡಿದರು.
ಇತರ ಇಲಾಖೆಗಳು ತಮ್ಮ ಆವರಣದಲ್ಲಿ ತಂಬಾಕು ನಿಷೇಧ ಫಲಕಗಳನ್ನು ಅಳವಡಿಸುವಂತೆ, ನಗರ ಸಭೆ ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸಬೇಕೆಂದು ಎಸ್ಪಿ ಸೂಚನೆ ನೀಡಿದರು.
ವಾರ್ತಾ ಇಲಾಖೆಯ ಪ್ರಚಾರ ಫಲಕಗಳನ್ನು ಈ ಸಂಬಂಧ ಬಳಸಲು ಹೇಳಿದರು. ಬಸ್ ಸ್ಟ್ಯಾಂಡ್, ಹೋಟೆಲ್, ಬೇಕರಿ, ಶಾಪ್ಸ್, ಸಿನಿಮಾ ಥಿಯೇಟರ್, ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ, ಪಾರ್ಕ್ ಗಳಲ್ಲಿ ತಂಬಾಕು ನಿಷೇಧ ವಲಯಗಳ ಬಗ್ಗೆ ಪ್ರಚಾರ ಫಲಕಗಳನ್ನು ಅಳವಡಿಸಿ ಮಾಹಿತಿ ನೀಡಲು 7 ದಿನಗಳ ಕಾಲಾವಕಾಶ ಬಳಕೆ ಮಾಡಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನ ಡಾ.ಜಾನ್ ಕೆನಡಿ ಅವರು ತಂಬಾಕಿನ ದುಷ್ಪರಿಣಾಮಗಳನ್ನು ವಿವರಿಸಿದರು. ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯ ಪ್ರಭಾರ ಉಪನಿರ್ದೇಶಕರಾದ ಯೋಗೇಶ್ವರ್, ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನ ಪ್ರವೀಣ್ ರಾವ್ ಅವರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.